ಇತ್ತೀಚೆಗಿನ ದಿನಗಳಲ್ಲಿ ಸಣ್ಣ ವಯಸ್ಸಿನವರೇ ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಈ ಹಿಂದೆ, ಚಿರಂಜೀವಿ ಸರ್ಜಾ (Chiranjeevi Sarja), ಪುನೀತ್ ರಾಜ್ ಕುಮಾರ್ (Puneeth Raj Kumar) ಹಾಗೂ ಸ್ಪಂದನಾ ವಿಜಯ್ ರಾಘವೇಂದ್ರ (Spandana Vijay Raghavendra) ಅವರ ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಇದೀಗ ರಾಜ್ ಕುಟುಂಬದ ವಿಜಯ್ ರಾಘವೇಂದ್ರರವರ ಮಡದಿ ಸ್ಪಂದನಾ ಹೃದಯಾಘಾತಕ್ಕೆ ಒಳಗಾಗಿ ಜೀವ ಕಳೆದುಕೊಂಡದ್ದು ಶಾಕ್ ನೀಡಿದೆ. ಸಣ್ಣ ವಯಸ್ಸಿನವರಲ್ಲಿಯೇ ಹೃದಯಾಘಾತ ಸಂಭವಿಸುತ್ತಿರುವ ಬಗ್ಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿಎನ್ ಮಂಜುನಾಥ್ (Dr. C.N Manjunath) ಮಾತನಾಡಿದ್ದಾರೆ.
ಖಾಸಗಿ ಸುದ್ದಿವಾಹಿನಿಯ ಜೊತೆಗೆ ಹೃದಯಾಘಾತಕ್ಕೆ ಸಂಬಂಧ ಪಟ್ಟ ವಿಚಾರವನ್ನು ಹಂಚಿಕೊಂಡ ಡಾ.ಸಿಎನ್ ಮಂಜುನಾಥ್ (Dr. C.N Manjunath), “ನಿಜವಾಗಲೂ ಇದು ಬಹಳ ನೋವಿನ ಸಂಗತಿ. ನಮ್ಮ ರಾಜ್ಯ ಹಾಗೂ ದೇಶದಲ್ಲಿ ಅದರಲ್ಲೂ ಯುವಕರು ಹಾಗೂ ಮಧ್ಯ ವಯಸ್ಕರಲ್ಲಿ ಹೃದಯಾಘಾತದ ಪ್ರಮಾಣ ಬಹಳ ಹೆಚ್ಚಾಗುತ್ತಿದೆ. ಇದು ಆತಂಕಕಾರಿ ಹಾಗೂ ಕಳವಳದ ಬೆಳವಣಿಗೆ. ಜಯದೇವ ಆಸ್ಪತ್ರೆಯಲ್ಲಿ ಕಳೆದ ಆರು ವರ್ಷಗಳಲ್ಲಿ ನಾವು ಐದೂವರೆ ಸಾವಿರ ಯುವಕರು ಹಾಗೂ ಮಧ್ಯವಯಸ್ಕರಿಗೆ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ನೀಡಿದ್ದೇವೆ. ಮಹಿಳೆಯರಲ್ಲಿ ಅದರಲ್ಲೂ 50 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಹಿಳೆಯರಲ್ಲಿ ಹೃದಯಾಘಾತದ ಪ್ರಮಾಣ ಬಹಳ ಅಂದರೆ ಬಹಳ ಕಡಿಮೆ” ಎಂದಿದ್ದಾರೆ.
“ನಮ್ಮ ಅಧ್ಯಯನದ ಪ್ರಕಾರ 45 ವರ್ಷಕ್ಕಿಂತ ಚಿಕ್ಕವರಲ್ಲಿ ಆಗಿರುವ ಹೃದಯಾಘಾತದ ಕೇಸ್ಗಳಲ್ಲಿ ಶೇ. 8ರಷ್ಟು ಮಹಿಳೆಯರಾಗಿದ್ದಾರೆ. 29 ವರ್ಷದ ವೈದ್ಯ, 30 ವರ್ಷದ ಸಾಫ್ಟ್ವೇರ್ ಕಂಪನಿಯ ಸಿಇಒ ಹಾಗೂ ತೀರಾ ಇತ್ತೀಚೆಗೆ 24 ವರ್ಷದ ಕೂಲಿ ಕಾರ್ಮಿಕ ಮಹಿಳೆಗೆ ಹೃದಯ ಸಂಬಂಧಿ ಚಿಕಿತ್ಸೆ ನೀಡಿದ್ದೇವೆ. ಇದನ್ನು ನೋಡುವುದಾದರೆ, ನಮ್ಮಲ್ಲಿ ಯುವಕರು ಹಾಗೂ ಮಧ್ಯವಯಸ್ಕರಲ್ಲಿ ಹೃದಯಾಘಾತದ ಪ್ರಮಾಣ ಹೆಚ್ಚಾಗುತ್ತಿದೆ. ಇಂದು ದೇಶದಲ್ಲಿ ಆಗುವ ಶೇ. 35 ರಷ್ಟು ಹೃದಯಾಘಾತದಲ್ಲಿ ರೋಗಿಗಳು 45 ವರ್ಷಕ್ಕಿಂತ ಕೆಳಗಿನವರಾಗಿದ್ದಾರೆ. ಸಾಮಾನ್ಯವಾಗಿ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಹೃದಯಾಘಾತದ ಸಂಖ್ಯೆ ಅಧಿಕ” ಎಂದಿದ್ದಾರೆ.
“ಆದರೆ ಭಾರತದಲ್ಲೂ ಅದೇ ಟ್ರೆಂಡ್ ಆಗುತ್ತಿದೆ. ಅತಿಯಾದ ಮದ್ಯಪಾನ, ಧೂಮಪಾನ, ಸಕ್ಕರೆ ಕಾಯಿಲೆ, ಕೊಬ್ಬಿನ ಅಂಶ ಹಾಗೂ ಅತಿಯಾದ ರಕ್ತದೊತ್ತಡ ಇದ್ದಲ್ಲಿ ಹೃದಯಾಘಾತವಾಗುತ್ತದೆ. ಇವೆಲ್ಲವೂ ಸಾಮಾನ್ಯ ಕಾರಣಗಳು. ನಾವು ಮಾಡಿರುವ ಯುವ ಹೃದಯರೋಗಿಗಳ ಅಧ್ಯಯನದ ಪ್ರಕಾರ ಶೇ. 25ರಷ್ಟು ರೋಗಿಗಳಲ್ಲಿ ಯಾವುದೇ ಕಾರಣವಿಲ್ಲದೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸಕ್ಕರೆ ಕಾಯಿಲೆ ಇಲ್ಲ, ಬಿಪಿ ಇಲ್ಲ. ಆದರೆ, ಅತಿಯಾದ ಒತ್ತಡದಿಂದಲೂ ಹೃದಯಾಘಾತ ಆಗುತ್ತಿದೆ. ಒತ್ತಡವನ್ನು ಈ ಯುಗದ ತಂಬಾಕು ಎಂದೇ ಹೇಳಬಹುದು. ಅದರೊಂದಿಗೆ ಈಗಿನ ಆಹಾರಗಳು, ನಮ್ಮ ಜೀವನಶೈಲಿ ಇದೆಲ್ಲವೂ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ” ಎಂದಿದ್ದಾರೆ.
“ಡ್ರಗ್ ಅಭ್ಯಾಸ ಇರುವ ಕಾಲೇಜು ವಿದ್ಯಾರ್ಥಿಗಳಲ್ಲೂ ಹೃದಯಾಘಾತ ಹೆಚ್ಚಾಗಿದೆ. ಒಂದು ವರ್ಷದ ಹಿಂದೆ ಹುಕ್ಕಾಬಾರ್ನ ಇಬ್ಬರು ಮಹಿಳೆಯರು ಹೃದಯಾಘಾತಕ್ಕೆ ಒಳಗಾಗಿ ಇಲ್ಲಿಗೆ ಬಂದಿದ್ದರು. ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ. ಅದರೊಂದಿಗೆ ವಂಶದಲ್ಲಿ ಹೃದಯಾಘಾತದ ಸಮಸ್ಯೆ ಇದ್ದಲ್ಲಿಯೂ ಹಾರ್ಟ್ಅಟ್ಯಾಕ್ಗೆ ಕಾರಣವಾಗಬಹುದು. 50 ವರ್ಷಕ್ಕಿಂತ ಚಿಕ್ಕವರಿಗೆ ಹೃದಯಾಘಾತ ಆದಲ್ಲಿ ಅದಕ್ಕೆ ಮೊದಲ ಕಾರಣ ಅವರ ವಂಶಪಾರಂಪರ್ಯ ಇತಿಹಾಸ. ಅತಿಯಾದ ವ್ಯಾಯಾಮ ಮಾಡೋದು ಒಳ್ಳೆಯದಲ್ಲ. 6 ತಿಂಗಳಲ್ಲೇ 15-20 ಕೆಜಿ ತೂಕ ಕಡಿಮೆ ಆಗಬೇಕು ಎನ್ನುವ ನಿಟ್ಟಿನಲ್ಲಿ ಅತಿಯಾಗಿ ವ್ಯಾಯಾಮ ಮಾಡುತ್ತಾರೆ. ಇದು ಒಳ್ಳೆಯದಲ್ಲ” ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.
“ಅತಿಯಾದ ಒತ್ತಡ, ವ್ಯಾಯಾಮ, ಎನರ್ಜಿ ಡ್ರಿಂಕ್ ಕುಡಿಯೋದು ಒಳ್ಳೆದಲ್ಲ. ಪಿಒಸಿಡಿ, ಫ್ಯಾಟಿ ಲಿವರ್ಗಳು ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತದೆ. ಕಳೆದ 10-15 ವರ್ಷದಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಮಾಣ ಶೇ. 22ರಷ್ಟು ಹೆಚ್ಚಾಗಿದೆ ಅನ್ನೋದು ನಮ್ಮ ಅಧ್ಯಯನದಿಂದ ಬಂದಿರುವ ಮಾಹಿತಿ. ಸ್ಪಂದನಾ ಕೇಸ್ನಲ್ಲಿ ಹೃದಯಾಘಾತದಿಂದಾಗಿ ಲೋ ಬಿಪಿ ಆಗಿದೆ. ಲೋ ಬಿಪಿಯಿಂದಾಗಿ ಹೃದಯಾಘಾತವಾಗೋದಿಲ್ಲ. ಸಾಮಾನ್ಯವಾಗಿ ಬಿಪಿ 120/80 ಇರಬೇಕು. ಆದರೆ, ಮಹಿಳೆಯರಲ್ಲಿ 90/70 ಇರುತ್ತದೆ. ಆದರೆ. ಹಾರ್ಟ್ ಅಲ್ಲಿ ಯಾವುದೇ ಸಮಸ್ಯೆ ಇರೋದಿಲ್ಲ. ಲೋ ಬಿಪಿ ಇರುವವರು ಬಿಸಿಲಲ್ಲಿ ನಿಂತಾಗ, ಊಟ ಮಾಡದೇ ಇದ್ದಾಗ ತಲೆ ಸುತ್ತು ಬರೋಕೆ ಸ್ಟಾರ್ಟ್ ಆಗುತ್ತೆ. ಆದರೆ, ಹೃದಯಾಘಾತ ಆಗೋದಿಲ್ಲ” ಎಂದು ಹೇಳಿದ್ದಾರೆ.
“ಸಾಮಾನ್ಯವಾಗಿ ಒಂದು ನಿಮಿಷಕ್ಕೆ ಹೃದಯದ ಬಡಿತ 70-80 ಇರುತ್ತದೆ. ಗಾಬರಿಯಾದಾಗ ಅದು 90 ಆಗುತ್ತದೆ. ಆದರೆ, ಹಾರ್ಟ್ ಅಟ್ಯಾಕ್ ಆದಾಗ 300ಕ್ಕೂ ಹೋಗುತ್ತದೆ.ಈ ಹಂತದಲ್ಲಿ ಹೃದಯದಿಂದ ರಕ್ತ ಹೊರಗೆ ಬರೋದೇ ಇಲ್ಲ. ಇದನ್ನು ವೆಂಟಿಕ್ಯುಲರ್ ಸಿಬ್ರಲ್ಯುಷನ್ ಎನ್ನುತ್ತೇವೆ. ಬದುಕುಳಿಯುವ ಸಣ್ಣ ಕಾಲಾವಕಾಶ ಕೂಡ ಸಿಗೋದಿಲ್ಲ. ಇಂಥ ಸಾವು ದುರಾದೃಷ್ಟಕರ. ಕೆಲವೊಬ್ಬರಿಗೆ ಹೃದಯಾಘಾತ ಆಗಿ ಒಂದು ದಿನದ ನಂತರ ಚಿಕಿತ್ಸೆ ಪಡೆದುಕೊಳ್ಳುತ್ತಾರೆ. ಆಸ್ಪತ್ರೆ ಬರುವವರೆಗೆ ನೋವು ಇರುತ್ತದೆಯೇ ಹೊರತು, ಹೃದಯ ನಿಂತಿರೋದಿಲ್ಲ. ಇದು ಹಾರ್ಟ್ ಅಟ್ಯಾಕ್. ಕಾರ್ಡಿಯಾಕ್ ಅರೆಸ್ಟ್ ಅಂದ್ರೆ ಹೃದಯ ನಿಂತು ಹೋಗುವುದು. ಹೃದಯಾಘಾತದ 100 ರೋಗಿಗಳಲ್ಲಿ 5-6 ರೋಗಿಗಳಿಗೆ ಮಾತ್ರವೇ ಹೀಗಾಗುತ್ತದೆ. ರಕ್ತನಾಳದ ಬ್ಲಾಕೇಜ್ ಇದ್ದಿರುವವರಿಗೆ ಹಾರ್ಟ್ ಅಟ್ಯಾಕ್ನ ಸುಳಿವು ಸಿಗುತ್ತದೆ” ಎಂದಿದ್ದಾರೆ.